ಬಸವಣ್ಣನವರ ಹೆಸರಿನಲ್ಲಿ ಯಲಹಂಕದಲ್ಲಿ ಭವ್ಯ ಉದ್ಯಾನ ನಿರ್ಮಿಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಉದ್ಯಾನವು ಲಾಲ್‌ಬಾಗ್ ಹಾಗೂ ಕಬ್ಬನ್ ಪಾರ್ಕ್ ನಂತರ ಬೆಂಗಳೂರಿನ ಮೂರನೇ ಅತಿದೊಡ್ಡ ಉದ್ಯಾನವಾಗಿರಲಿದೆ.

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಸಮೀಪದ ಮಾದಪ್ಪನಹಳ್ಳಿಯಲ್ಲಿ 153 ಎಕರೆ ವಿಸ್ತೀರ್ಣದಲ್ಲಿ ‘ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನ’ವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

Cabinet Nod for Basavanna Park_ 153-Acre Biodiversity Hub Planned in Yelahanka

ನಗರದಲ್ಲಿ ವೇಗವಾಗಿ ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಪರಿಸರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು, ಈ ಉದ್ಯಾನವನ್ನು ಬೆಂಗಳೂರು ನಗರಕ್ಕೆ ಅತ್ಯಗತ್ಯವಾದ ಶ್ವಾಸಕೋಶ ಮತ್ತು ಮನೋಲ್ಲಾಸ ಕೇಂದ್ರವಾಗಿ ರೂಪಿಸಲಾಗುವುದು. ಯೋಜನೆಯ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 50 ಕೋಟಿ ರುಪಾಯಿ ಅನುದಾನ ಮಂಜೂರು ಮಾಡಿದೆ ಎಂದೂ ಅವರು ತಿಳಿಸಿದರು.

ಈ ಮಹತ್ವದ ಯೋಜನೆಗೆ ಬೆಂಬಲ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಅರಣ್ಯ ಸಚಿವರು ತಿಳಿಸಿದರು. ‘ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನ’ವು ಪರಿಸರ ಸಂರಕ್ಷಣೆ, ಜೈವಿಕ ವೈವಿಧ್ಯ ಹಾಗೂ ಸಾರ್ವಜನಿಕ ಮನೋರಂಜನೆಗೆ ಮಹತ್ವದ ಕೊಡುಗೆ ನೀಡಲಿದೆ ಎಂದು ಅವರು ಹೇಳಿದರು.