ಪಾಸ್ಪೋರ್ಟ್-ವೀಸಾ ಸೇವೆಗಳ ಟೆಂಡರ್ ರದ್ದು
ಅಬುಧಾಬಿ, ಕುವೈತ್, ಸಿಂಗಾಪುರ ಮತ್ತು ಕ್ಯಾನ್ಬೆರಾದ ಭಾರತೀಯ ಮಿಷನ್ಗಳಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಯಲ್ಲಿ ಕೇಂದ್ರ ಸರಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಭಾರತೀಯ ರಾಯಭಾರಿ ಕಚೇರಿಗಳಲ್ಲಿ ಪಾಸ್ಪೋರ್ಟ್, ವೀಸಾ ಹಾಗೂ ಕಾನ್ಸುಲರ್ (CPV) ಸೇವೆಗಳ ಹೊರಗುತ್ತಿಗೆ ಟೆಂಡರ್ಗಳನ್ನು ರದ್ದುಗೊಳಿಸಿದ್ದ ದೆಹಲಿ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಅಬುಧಾಬಿ, ಕುವೈತ್, ಸಿಂಗಾಪುರ ಮತ್ತು ಕ್ಯಾನ್ಬೆರಾದ ಭಾರತೀಯ ಮಿಷನ್ಗಳಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಯಲ್ಲಿ ಕೇಂದ್ರ ಸರಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ಟೆಂಡರ್ ಮೌಲ್ಯಮಾಪನದಲ್ಲಿ ಪಾರದರ್ಶಕತೆ, ನ್ಯಾಯಸಮ್ಮತತೆ ಹಾಗೂ ಸಮಾನತೆಯ ಕೊರತೆ ಇದ್ದು, ಪ್ರಕ್ರಿಯೆ ಸ್ವೇಚ್ಛಾಚಾರದಿಂದ ಕೂಡಿದೆ ಎಂದು ದೆಹಲಿ ಹೈಕೋರ್ಟ್ ಈ ಹಿಂದೆ ಅಭಿಪ್ರಾಯಪಟ್ಟಿತ್ತು. ಈ ಕಾರಣದಿಂದ ಟೆಂಡರ್ಗಳನ್ನು ರದ್ದುಗೊಳಿಸಿ ಹೊಸ ಟೆಂಡರ್ ಪ್ರಕ್ರಿಯೆ ನಡೆಸುವಂತೆ ನಿರ್ದೇಶಿಸಿತ್ತು.
ಇದೀಗ ಸುಪ್ರೀಂ ಕೋರ್ಟ್ ಕೂಡ ಇದೇ ನಿಲುವನ್ನು ಸಮರ್ಥಿಸಿದ್ದು, ವಿದೇಶದಲ್ಲಿರುವ ಭಾರತೀಯರಿಗೆ ಪಾಸ್ಪೋರ್ಟ್ ಮತ್ತು ವೀಸಾ ಸೇವೆಗಳಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಮಧ್ಯಂತರ ವ್ಯವಸ್ಥೆಯನ್ನು ಮುಂದುವರಿಸಲು ಅನುಮತಿ ನೀಡಿದೆ. ಜತೆಗೆ, ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಮೂರು ತಿಂಗಳೊಳಗೆ ಹೊಸ ಟೆಂಡರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸೂಚಿಸಿದೆ. ಈ ಮಧ್ಯಂತರ ವ್ಯವಸ್ಥೆಯಿಂದ ಯಾವುದೇ ಸಂಸ್ಥೆಗೆ ಶಾಶ್ವತ ಹಕ್ಕು ಸೃಷ್ಟಿಯಾಗುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.